ಜೈವಿಕವಾಗಿ ವಿಘಟನೆಯಾಗುವ ಕೈಚೀಲಕ್ಕೆ ಸಂಪುಟ ಸಮ್ಮತಿ:ಈಶ್ವರ ಖಂಡ್ರೆ

YDL NEWS
1 Min Read

ಬೆಂಗಳೂರು, ಜು.18: ಜೈವಿಕವಾಗಿ ವಿಘಟನೆಯಾಗುವ ಕೈಚೀಲ (ಕ್ಯಾರಿ ಬ್ಯಾಗ್)ಗಳ ತಯಾರಿಕೆ, ದಾಸ್ತಾನು, ಮಾರಾಟಕ್ಕೆ ಅವಕಾಶ ಆಗುವಂತೆ 2016ರ ಅಧಿಸೂಚನೆಯಲ್ಲಿ ಪ್ಲಾಸ್ಟಿಕ್ ಕ್ಯಾರಿಬ್ಯಾಗ್ ವ್ಯಾಖ್ಯಾನಕ್ಕೆ ತಿದ್ದುಪಡಿ ತರಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಅವರು, 2016ರ ಸರ್ಕಾರದ ಅಧಿಸೂಚನೆಯಲ್ಲಿ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಭಿತ್ತಿಪತ್ರ, ತೋರಣ, ಫ್ಲೆಕ್ಸ್, ಪ್ಲಾಸ್ಟಿಕ್ ತಟ್ಟೆ, ಲೋಟ, ಚಮಚ, ಪ್ಲಾಸ್ಟಿಕ್ ಹಾಳೆಗಳ ತಯಾರಿಕೆ, ಮಾರಾಟ, ದಾಸ್ತಾನು ನಿಷೇಧಿಸಲಾಗಿತ್ತು. ಆದರೆ ಇತ್ತೀಚೆಗೆ ಸಸ್ಯಜನ್ಯ ಕೈಚೀಲಗಳ ಆವಿಷ್ಕಾರವಾಗಿದ್ದು, ಇದು 180 ದಿನಗಳಲ್ಲಿ ಜೈವಿತವಾಗಿ ವಿಘಟನೆಯಾಗುತ್ತದೆ, ಹೀಗಾಗಿ ಇದರ ಮಾರಾಟಕ್ಕೆ ಅನುಕೂಲವಾಗುವಂತೆ ತಿದ್ದುಪಡಿ ತರಲಾಗಿದ್ದು, ಸಚಿವ ಸಂಪುಟ ಸಮ್ಮತಿ ನೀಡಿದೆ ಎಂದರು.

ಈ ಹಿಂದೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ನಡೆದ ಸಭೆಯಲ್ಲಿ ತಾವು 2016ರ ಅಧಿಸೂಚನೆಗೆ ತಿದ್ದುಪಡಿ ತಂದು, ಕೇಂದ್ರ ಪರಿಸರ ಇಲಾಖೆಯ 2021ರ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ (ತಿದ್ದುಪಡಿ) ನಿಯಮಗಳನ್ನು ಅಳವಡಿಸಿಕೊಳ್ಳುವ ಬಗ್ಗೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದ್ದಾಗಿ ಸ್ಮರಿಸಿದರು.

ಪರಿಸರಕ್ಕೆ ಹಾನಿಕಾರಕವಲ್ಲದ ಮತ್ತು ಜೈವಿಕವಾಗಿ ವಿಘಟನೆಯಾಗುವ (ಬಯೋ ಡೀಗ್ರೇಡಬಲ್ -ಕಂಪೋಸ್ಟಬಲ್) ಕೈಚೀಲಗಳನ್ನು ಮತ್ತು ಮೊದಲೇ ಪ್ಯಾಕ್ ಮಾಡಿ ಸೀಲ್ಜನ ಮಾಡಿದ ಪ್ಯಾಕೇಜಿಂಗ್ ಪ್ಲಾಸ್ಟಿಕ್ ಗೆ ಸಂಬಂಧಿಸಿದಂತೆ ತಿದ್ದುಪಡಿ ಮಾಡಲಾಗಿದೆ. ಇದು ಕೇಂದ್ರ ಸರ್ಕಾರದ 21ರ ಆದೇಶಕ್ಕೆ ಅನುಗುಣವಾಗಿದೆ ಎಂದು ತಿಳಿಸಿದರು.

Share This Article